ಕನ್ನಡ ಭಾಷೆಗೆ ಗೂಗಲ್ನಿಂದ ಅವಮಾನ; ಗೂಗಲ್ಗೆ ಬಿಸಿ ಮುಟ್ಟಿಸಿದ ಕನ್ನಡಿಗರು!
ಸರ್ಚ್ ಇಂಜಿನ್ ದೈತ್ಯ ಎಂದು ಗುರುತಿಸಿಕೊಂಡಿರುವ ಗೂಗಲ್ ಸರ್ಚ್ನಲ್ಲಿ Ugliest Language of India-(ಭಾರತದ ಅತ್ಯಂತ ಕುರೂಪಿ ಭಾಷೆ) ಎಂದು ಸರ್ಚ್ ಮಾಡಿದರೆ ಫಲಿತಾಂಶದಲ್ಲಿ ಕನ್ನಡ ಕೊಳಕು ಭಾಷೆ ಎಂದು ಕಾಣಿಸಿದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ಐತಿಹಾಸಿಕ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಇದು ಅಪಮಾನದ ಸಂಗತಿ. ಕನ್ನಡ ಭಾಷೆಗೆ ಆಗಿರುವ ಈ ಅವಮಾನದ ವಿರುದ್ಧ ಕನ್ನಡಿಗರು ಗೂಗಲ್ಗೆ ಬಿಸಿ ಮುಟ್ಟಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಗೂಗಲ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಅನವಶ್ಯಕವಾಗಿ ಕನ್ನಡಿಗರ ಬಗ್ಗೆ ಕೀಳರಿಮೆ ಬಿಂಬಿಸುವ ಗೂಗಲ್ ಯತ್ನದ ವಿರುದ್ಧ ಧ್ವನಿ ಎತ್ತಲಾಗುತ್ತಿದೆ. ಗೂಗಲ್ನಂತಹ ದೊಡ್ಡ ಸಂಸ್ಥೆ ಕನ್ನಡ ಭಾಷೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಹಾಗೂ ಈ ಕೂಡಲೇ ಪ್ರಮಾದವನ್ನು ಸರಿಪಡಿಸಬೇಕು ಎಂದು ಕನ್ನಡಿಗರು ಒತ್ತಾಯಿಸುತ್ತಿದ್ದಾರೆ.
ಈ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಮಾತನಾಡಿ, "ನಾವು ಈ ವಿಚಾರವಾಗಿ ಕಾನೂನು ಹೋರಾಟಕ್ಕೆ ಇಳಿದಿದ್ದೇವೆ. ಗೂಗಲ್ನಲ್ಲಿ ಕನ್ನಡವನ್ನು ಅವಮಾನಿಸಿದ್ದನ್ನು ಖಂಡಿಸಿ ಲೀಗಲ್ ನೋಟಿಸ್ ಕಳುಹಿಸಿದ್ದೇವೆ. ನೆಲ, ಜಲ, ಭಾಷೆ, ಸಂಸ್ಕೃತಿಯ ವಿಚಾರದಲ್ಲಿ ಇನ್ನೊಬ್ಬರನ್ನು ಅಪಮಾನ ಮಾಡುವುದನ್ನು ಸಹಿಸಲಾಗದು. ಇದೊಂದು ಬಗೆಯ ವ್ಯವಸ್ಥಿತ ಸಂಚು ಎನ್ನುವುದು ಸ್ಪಷ್ಟವಾಗಿದೆ'' ಎಂದರು.

ಕನ್ನಡಿಗರನ್ನು ಹಾಗೂ ಕನ್ನಡ ಭಾಷೆಯನ್ನು ನಿಕೃಷ್ಟವಾಗಿ ಕಾಣುವ ಮನಸ್ಥಿತಿಗಳು ಇಂತಹ ಅವಕಾಶ ಸೃಷ್ಟಿಸಲು ಹೊಂಚು ಹಾಕಿ ಕುಳಿತಿರುತ್ತವೆ. ಇದಕ್ಕೆ ಪ್ರತಿರೋಧ ಒಡ್ಡುವುದಷ್ಟೇ ನಮ್ಮ ಕೆಲಸ ಅಲ್ಲ. ಬದಲಾಗಿ ಈ ತೆರನಾದ ಘಟನೆಗಳು ಜರುಗದಂತೆ ಕಾವಲಿರಬೇಕು. ನಮ್ಮತನಕ್ಕೆ ಧಕ್ಕೆಯಾಗುವ ಸಣ್ಣ ವಿಚಾರವನ್ನೂ ಸಹಿಸುವುದಿಲ್ಲ ಎನ್ನುವುದನ್ನು ಕನ್ನಡಿಗರು ಗಟ್ಟಿ ಧ್ವನಿಯಲ್ಲಿ ಹೇಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


Click it and Unblock the Notifications








