ಸಾಮಾಜಿಕ ಜಾಲತಾಣಗಳ ದುರ್ಬಳಕೆ ಮೇಲೆ ಕಡಿವಾಣ: ಸುಪ್ರೀಂ ಸೂಚನೆ!
ಸಾಮಾಜಿಕ ಜಾಲತಾಣಗಳಲ್ಲಿನ ಮಾಹಿತಿ ಮತ್ತು ದತ್ತಾಂಶಗಳ ಕುರಿತು ಕೇಂದ್ರ ಸರ್ಕಾರ ಸೂಕ್ತ ಮತ್ತು ಸಮರ್ಪಕ ನೀತಿ ರೂಪಿಸಬೇಕು. ಸಾಮಾಜಿಕ ಜಾಲತಾಣಗಳ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಕೈ ಕಟ್ಟಿ ಕೂರಲು ಸಾಧ್ಯವಿಲ್ಲ. ನಮ್ಮ ಬಳಿ ಅಂತಹ ತಂತ್ರಜ್ಞಾನವಿಲ್ಲವೆಂದು ಕೈ ಚೆಲ್ಲಿ ಕೂರಲೂ ಸಹ ಸಾಧ್ಯವಿಲ್ಲ. ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳ ದುರ್ಬಳಕೆ ಮೇಲೆ ಕಡಿವಾಣ ಹಾಕಬೇಕು. ಶೀಘ್ರದಲ್ಲೇ ಕೇಂದ್ರ ಸರ್ಕಾರ ಈ ಬಗ್ಗೆ ಮಾರ್ಗಸೂಚಿ ಅಳವಡಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಹೌದು, ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಗುಪ್ತಾ, ಅನಿರುದ್ಧಾ ಬೋಸ್ ನೇತೃತ್ವದ ದ್ವಿಸದಸ್ಯ ವಿಶೇಷ ಪೀಠ, ಸಾಮಾಜಿಕ ಜಾಲತಾಣಗಳ ದುರ್ಬಳಕೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದೆ. ಸಾಮಾಜಿಕ ಜಾಲತಾಣಗಳ ದುರ್ಬಳಕೆಗೆ ಸಂಬಂಧಿಸಿದಂತೆ ನಾವು ಕೈ ಕಟ್ಟಿ ಕೂರಲು ಸಾಧ್ಯವಿಲ್ಲ. ನಮ್ಮಲ್ಲಿ ತಂತ್ರಜ್ಞಾನ ಕೂಡ ಇಲ್ಲ ಎಂದು ಹೇಳುವುದು ಸರಿಯಲ್ಲ. ಮೂಲ ಸಂದೇಶವನ್ನು ಯಾರು ಕಳುಹಿಸುತ್ತಾರೋ ಅವರನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸುವ ಕ್ರಮ ಜಾರಿಗೆ ಬರಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಸಾಮಾಜಿಕ ಜಾಲತಾಣಗಳ ಮೇಲೆ ಸಂಪೂರ್ಣ ನಿಗಾ ಇರಿಸುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿರುವ ನ್ಯಾಯಪೀಠ, ಈ ಸಂಬಂಧ ಮೂರು ಹಂತದ ಮಾರ್ಗಸೂಚಿಯನ್ನು ಜಾರಿಗೆ ತರಬೇಕು ಎಂದು ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಮೊದಲಿಗೆ ಸಂದೇಶ ಕಳುಹಿಸುವ ಮೂಲ ಬಳಕೆದಾರರನ್ನು ಪತ್ತೆಹಚ್ಚಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಸದ್ಯದ ಸ್ಥಿತಿಯಲ್ಲಿ ಇದು ಸಾಧ್ಯವಿಲ್ಲದಂತಾಗಿರುವುದು ಎಂಬುದು ನಿಜಕ್ಕೂ ಪ್ರಶ್ನಾರ್ಥಕವಾಗಿದೆ ಎಂದು ನ್ಯಾಯಪೀಠವು ಅಶ್ಚರ್ಯವ್ಯಕ್ತಪಡಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ನಡೆಸಸುವಾಗಲೂ ಕೂಡ ನ್ಯಾಯಪೀಠ, 'ಸುಳ್ಳು ಸುದ್ದಿಗಳು, ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಫೇಸ್ಬುಕ್, ವಾಟ್ಸ್ಆಪ್, ಟ್ವಿಟರ್ ಇತ್ಯಾದಿ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶಗಳು ಪ್ರಸಾರವಾದಾಗ, ಅವುಗಳ ಮೂಲವನ್ನು ಪತ್ತೆ ಹಚ್ಚಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು. ಇದೀಗ ಶೀಘ್ರದಲ್ಲೇ ಕೇಂದ್ರ ಸರ್ಕಾರ ಈ ಬಗ್ಗೆ ಮಾರ್ಗಸೂಚಿ ಅಳವಡಿಸಬೇಕು ಎಂದು ಸೂಚಿಸಿದೆ.

ಇನ್ನು ಸಾಮಾಜಿಕ ಜಾಲತಾಣಗಳ ನಿಯಂತ್ರಣ ಅಥವಾ ಬಳಕೆಯ ಬಗ್ಗೆ ಸುಪ್ರೀಂಕೋರ್ಟ್ ಆಗಲಿ ಅಥವಾ ಹೈಕೋರ್ಟ್ ಆಗಲಿ ಯಾವುದೇ ನಿರ್ಣಯ ಅಥವಾ ಕ್ರಮವನ್ನು ಕೈಗೊಳ್ಳಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದಿಂದಲೇ ಈ ಕುರಿತು ಕ್ರಮ ಕೈಗೊಳ್ಳಲು ಸಾಧ್ಯ. ಈ ಕುರಿತಂತೆ ಸೂಕ್ತ ಮಾರ್ಗ ಸೂಚಿ ಸಿದ್ಧಪಡಿಸಬೇಕು ಎಂದು ಸುಪ್ರೀಂ ನ್ಯಾಯಪೀಠ ಹೇಳಿದೆ. ಇದರಿಂದ ಫೇಸ್ಬುಕ್ ಮತ್ತು ವಾಟ್ಸ್ಆಪ್ ಸೇರಿದಂತೆ ಎಲ್ಲ ಜಾಲತಾಣಗಳೂ ಕೂಡ ಸರ್ಕಾರದ ಕೆಂಗಣ್ಣಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚಾಗಿದೆ.


Click it and Unblock the Notifications








